ಬೆಂಗಳೂರು : ಜನವರಿ 12: ದ್ರಶ್ಯ ನ್ಯೂಸ್:ನಮ್ಮ ಮೆಟ್ರೋ ಎಂಡಿಯಾಗಿದ್ದಂತ ಅಂಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಿಸಿತ್ತು. ಅವರು ಇಂದು ಬಿಎಂಆರ್ ಸಿಎಲ್ ನೂತನ ಎಂ.ಡಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.
ಎಂ. ಮಹೇಶ್ವರ ರಾವ್, ಭಾ.ಆ.ಸೇ ಅವರು ಇಂದು ದಿನಾಂಕ 12.01.2024 ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು.
ಇದಕ್ಕೂ ಮೊದಲು ಅವರು ಬೆಂಗಳೂರಿನ ಬಾಹ್ಯಾಕಾಶ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಹಣಕಾಸು ಸಲಹೆಗಾರ ಹುದ್ದೆಯನ್ನು ಹೊಂದಿದ್ದರು. ಎಂ. ಮಹೇಶ್ವರ ರಾವ್, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ನಿಜಾಮ್ ಕಾಲೇಜಿನಲ್ಲಿ ಗಣಿತ, ಅರ್ಥಶಾಸ್ತ್ರ ಮತ್ತು ಅಂಕಿಅಂಶಗಳಲ್ಲಿ ಬಿಎ, ಹೈದರಾಬಾದ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ NUS ಮತ್ತು ಹಾರ್ವಡ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಕರ್ನಾಟಕ ಸರ್ಕಾರದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಮಂಡ್ಯ, ಮಂಗಳೂರು, ಬೆಳಗಾವಿ ಮತ್ತು ಹಾಸನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯ ಕೈಗಾರಿಕಾ ಹೂಡಿಕೆ ಮತ್ತು ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ನ ವ್ಯವಸ್ಮಾಪಕ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಕರ್ನಾಟಕ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತರಾಗಿ ಕಾರ್ಯ ನಿವಹಿಸಿದ್ದಾರೆ.