ಉಡುಪಿ: ಸೆಪ್ಟೆಂಬರ್ 12:ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ ಐವತ್ತು ವಷರ್ಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರವು ಸುವರ್ಣ ಸಂಭ್ರಮ-50 ಕಾರ್ಯಕ್ರಮವನ್ನು ಆಯೋಜಿಸಿದೆ. ಇದರ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶಿರೋನಾಮೆಯಲ್ಲಿ ರಾಜ್ಯದ ನಾಲ್ಕು ವಿಭಾಗ ಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಉಡುಪಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿ ಯಿಂದ ಜಿಲ್ಲೆಯ ಪ್ರೌಢ ಶಾಲಾ ವಿಭಾಗಕ್ಕೆ ಜಿಲ್ಲಾ ಮಟ್ಟದ ‘ಕರಾವಳಿ ಕರ್ನಾಟಕದ ಬಹುಸಂಸ್ಕೃತಿಯ ಪರಂಪರೆ’ ಎಂಬ ಶೀರ್ಷಿಕೆಯಡಿ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 3,000ರೂ., ದ್ವಿತೀಯ ಬಹುಮಾನ 2,000ರೂ., ತೃತೀಯ ಬಹುಮಾನ 1,000ರೂ. ನಗದು ಹಾಗೂ 5 ಸಮಾಧಾನಕರ ಬಹುಮಾನಗಳು ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.