ಮೈಸೂರು: ಫೆಬ್ರವರಿ 09: ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳ ಕಾಲ ನಡೆಯಲಿರುವ ಕುಂಭಮೇಳಕ್ಕೆ ಭರದ ಸಿದ್ದತೆ ನಡೆದಿದೆ.
ಮೈಸೂರು ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ ಸಹಯೋಗದೊಂದಿಗೆ 13ನೇ ಕುಂಭಮೇಳವನ್ನು ಫೆ.10, 11 ಮತ್ತು 12 ರಂದು ಜಿಲ್ಲೆಯ ಟಿ.ನರಸೀಪುರದ ಶ್ರೀ ಕ್ಷೇತ್ರ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದೆ.
ತಿರುಮಕೂಡಲು ನರಸೀಪುರದಲ್ಲಿ ಕಾವೇರಿ ಹಾಗೂ ಕಬಿನಿ ನದಿಗಳು ಸಂಗಮಿಸುತ್ತವೆ. ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಈ ಪುಣ್ಯಕ್ಷೇತ್ರದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭ ಮೇಳ ನಡೆಯುತ್ತದೆ. ಇಲ್ಲಿ ಭಕ್ತರಿಗೆ ಪುಣ್ಯಸ್ನಾನಕ್ಕೆ 5 ಕಡೆ ಸ್ಥಳ ಗುರುತು ಮಾಡಲಾಗಿದೆ.
ಫೆ.10ರ ಬೆಳಗ್ಗೆ 8.30ಕ್ಕೆ ಶ್ರೀ ಅಗಸ್ತ್ಯೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನುಜ್ಞಾ ಕಾರ್ಯಕ್ರಮ, ಅಂಕುರಾರ್ಪಣೆ ಮತ್ತು ಧ್ವಜಾರೋಹಣ ನೆರವೇರಲಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ.ಮಹದೇವಪ್ಪ ಧ್ವಜಾರೋಹಣನೆರವೇರಿಸಿ, ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಫೆ.11ರಬೆಳಗ್ಗೆ 11ಕ್ಕೆ ಧಾರ್ಮಿಕಸಭೆಯನ್ನು ಏರ್ಪಡಿಸಲಾಗಿದ್ದು, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಉದ್ಘಾಟಿಸುವರು. ಸಚಿವರಾದ ಮಹದೇವಪ್ಪ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕರ್ ಭಾಗವಹಿಸುವರು.
ಫೆ.12ರ ಮಧ್ಯಾಹ್ನ 12ಕ್ಕೆ ಧರ್ಮಸಭೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸಮಾರೋಪ ಭಾಷಣ ಮಾಡುವರು.