ಕಾರ್ಕಳ:: ಎಸ್.ವಿ.ಟಿ ಮೀರಾ ಕಾಮತ್ ಮೆಮೋರಿಯಲ್ ಗಣಕಯಂತ್ರ ಪ್ರಯೋಗಾಲಯ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ದೇವಳದ ಒಂದನೇ ಆಡಳಿತ ಮೊಕ್ತೇಸರರಾದ ಶ್ರೀ ಕೆ.ಜಯರಾಮ ಪ್ರಭು ವಹಿಸಿದ್ದರು. ಗಣಕಯಂತ್ರ ಪ್ರಯೋಗಾಲಯವನ್ನು ನಿವೃತ್ತ ಲೆಕ್ಕ ಪರಿಶೋಧಕರಾದ ಶ್ರೀ ಕಾರ್ಕಳ ಕಮಲಾಕ್ಷ ಕಾಮತ್ ಉದ್ಘಾಟಿಸಿ ಶುಭ ಹಾರೈಸಿದರು. ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕಾರ್ಕಳ ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ಶ್ರೀ ಗುರುದತ್ ಎಂ.ಎನ್ ಅವರು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು. ಎಸ್.ವಿ ಎಜ್ಯುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ ಕೆ ಪಿ ಶೆಣೈ “ನೇಸರ ಭಿತ್ತಿ ಪತ್ರಿಕೆ”ಯನ್ನು ಅನಾವರಣಗೊಳಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬರೆವಣಿಗೆಯಲ್ಲಿ ತೊಡಗಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಮುಖ್ಯ ಅತಿಥಿಯಾಗಿ ಎಸ್. ವಿ. ಎಜ್ಯುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ಶ್ರೀಯುತ ಐ ರವೀಂದ್ರನಾಥ ಪೈ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಉಷಾ ನಾಯಕ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಮಾಲಿನಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕುಮಾರಿ ಸುವೀಕ್ಷಾ, ಉಪಾಧ್ಯಕ್ಷ ಮಾ. ನಿಖಿತ್ ಕೆ ಎಸ್, ಕಾರ್ಯದರ್ಶಿ ಕುಮಾರಿ ಮನೀಕ್ಷಾ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಶಿಕ್ಷಕ ಶ್ರೀ ದೇವದಾಸ್ ಕೆರೆಮನೆ ಅಭಿನಂದನಾ ಮಾತುಗಳನ್ನಾಡಿದರು. ರಾಜ್ಯ ಶಾಸ್ತ್ರ ಉಪನ್ಯಾಸಕ ಶ್ರೀಯುತ ನೇಮಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮದಾಸ್ ಪ್ರಭು ಸ್ವಾಗತಿಸಿದರು. ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಯೋಗೇಂದ್ರ ನಾಯಕ್ ವಂದಿಸಿದರು.